ಮಡಿಕೇರಿ, ಸೆ. ೨೬: ನಾಡಹಬ್ಬ ದಸರಾ ಮಹೋತ್ಸವದ ಹಿನ್ನಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸುವ ದಸರೆಯ ಸಂಭ್ರಮ, ಸಡಗರವನ್ನು ಇಮ್ಮಡಿಗೊಳಿಸಲು ವಿದ್ಯುತ್ ದೀಪಾಲಂಕಾರ ವೀಕ್ಷಿಸಲು ಲಕ್ಷಾಂತರ ಜನ ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದ ಕಣ್ತುಂಬಿಕೊಳ್ಳುವ ಸಂದರ್ಭದಲ್ಲಿ ಸುರಕ್ಷತೆಗೂ ಆದ್ಯತೆ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದೆ.
ಸುರಕ್ಷತಾ ಸಲಹೆಗಳು: ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ಫೋಟೋ/ವೀಡಿಯೋ ಶೂಟ್ ಮಾಡುವುದನ್ನು ತಪ್ಪಿಸಿ, ಮಳೆಸಂದರ್ಭ ದಲ್ಲಿ ವಿದ್ಯುತ್/ ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸಿ. ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ಕೆಲವು ಕಡೆಗಳಲ್ಲಿ ದೀಪಾಲಂಕಾರದ ಪ್ರತಿಕೃತಿಗಳನ್ನು ಇರಿಸಲಾಗಿದೆ. ಆದ್ದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಇವುಗಳನ್ನು ಗಮನಿಸಿ ಸುರಕ್ಷಿತವಾಗಿ ಸಂಚರಿಸಲು ಕೋರಲಾಗಿದೆ.
ಗ್ರಾಹಕರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಸೆಸ್ಕ್ ಪ್ರಥಮ ಆದ್ಯತೆ ನೀಡುತ್ತದೆ. ಸಾರ್ವಜನಿಕರು ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವಾಗ ಸುರಕ್ಷತೆಗೂ ನಿಗಾವಹಿಸಬೇಕು. ಆದ್ದರಿಂದ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳಬೇಕಿದೆ. ವಿಶೇಷವಾಗಿ ಮಳೆಯ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್(ವಿ) ಎಂ.ರಾಮಚAದ್ರ ಅವರು ಕೋರಿದ್ದಾರೆ.