ಮಡಿಕೇರಿ, ಸೆ. ೨೯: ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ/ ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ನ್ನು ಕಡ್ಡಾಯವಾಗಿ ಬರೆಸಲು ಸರಕಾರದ ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ ೧೦೯೮ ಮಹತ್ವದ ಪಾತ್ರ ವಹಿಸುತ್ತದೆ.

ಬಾಲ್ಯವಿವಾಹ, ಬಾಲಕಾರ್ಮಿಕತೆ, ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಪ್ರದರ್ಶಿಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

ಈಗಾಗಲೇ ಕೆಲವು ಇಲಾಖೆಗಳು ಈ ಕುರಿತು ಕ್ರಮವಹಿಸಿವೆ. ಕೆಲವು ಇಲಾಖೆಗಳಲ್ಲಿ ಈ ಬಗ್ಗೆ ನಿರ್ದೇಶನವಿಲ್ಲ ಎಂಬ ಗೊಂದಲಗಳಿAದ ಶಾಶ್ವತ ಫಲಕಗಳಲ್ಲಿ ಪ್ರದರ್ಶಿಸದೇ ಇರುವುದು ತಿಳಿದು ಬಂದಿದ್ದು, ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಶಾಶ್ವತ ಫಲಕದಲ್ಲಿ ಪ್ರದರ್ಶಿಸದೆ ಇರುವ ಇಲಾಖೆಗಳು ಯಾವುದೇ ಗೊಂದಲಗಳಿಗೆ ಆಸ್ಪದ ಕೊಡದೇ ತಕ್ಷಣ ಕ್ರಮಕೈಗೊಂಡು ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ನ್ನು ತಮ್ಮ ಇಲಾಖೆಯ ಶಾಶ್ವತ ಫಲಕದಲ್ಲಿ ಪ್ರದರ್ಶಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.