ಕುಶಾಲನಗರ, ಅ. ೭: ಕೊಡಗು ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮಗಳಿಗಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಮೂಲಕ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಭವನವೊಂದನ್ನು ನಿರ್ಮಿಸಿ ಮಕ್ಕಳಿಗೆ ಪರಿಸರದ ಬಗ್ಗೆ ಜ್ಞಾನ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ತಿಳಿಸಿದ್ದಾರೆ. ಅವರು ಕುಶಾಲನಗರದಲ್ಲಿ ನಿವೃತ್ತ ಸ್ಕೌಟರ್ಸ್ ಮತ್ತು ಗೈಡರ್ಸ್ ಶಿಕ್ಷಕರಿಗೆ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಕೆಲಸ ಆಗಬೇಕಿದೆ. ಶಿಸ್ತು, ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು. ಪ್ರತಿಯೊಬ್ಬರಲ್ಲಿ ಸೇವಾ ಮನೋಭಾವನೆ ಮೂಡಬೇಕು ಹೃದಯಗಳನ್ನು ಒಗ್ಗೂಡಿಸುವ ಮೂಲಕ ಶಾಂತಿ ಸ್ಥಾಪನೆ ಸಾಧ್ಯ ಎಂದ ಅವರು; ಸಮಯವನ್ನು ಬಳಸಿ ಸೇವೆಯಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಮಾನವ ಮೌಲ್ಯವನ್ನು ಎತ್ತಿ ಹಿಡಿಯುವಂತಾಗಬೇಕು ಎಂದರು.
ಕುಶಾಲನಗರ ಸಮೀಪದ ಮುಳ್ಳುಸೋಗೆ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ೨೧ ಮಂದಿ ನಿವೃತ್ತ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೆ ಮುನ್ನ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಆಯುಕ್ತ ಬೇಬಿ ಮ್ಯಾಥ್ಯೂ, ಮೈಸೂರು ಜಿಲ್ಲಾ ಆಯುಕ್ತ ಬಸವರಾಜು, ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ, ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಪ್ರಮುಖರಾದ ಪದ್ಮಶ್ರೀ ವಿಜೇತ ರಾಣಿ ಮಾಚಯ್ಯ ಜಿಮ್ಮಿ ಸಿಕ್ವೆರಾ, ವಸಂತಿ, ತರಬೇತುದಾರರಾದ ಮೈಥಿಲಿ ಎಸ್. ರಾವ್, ಜಿಲ್ಲಾ ಕಾರ್ಯದರ್ಶಿ ತಮ್ಮಯ್ಯ, ಮುದ್ದಯ್ಯ ಸ್ಥಾನಿಕ ಆಯುಕ್ತ ಮುತ್ತಪ್ಪ, ಸ್ಥಳೀಯ ಸಂಸ್ಥೆಯ ಯು.ಸಿ. ದಮಯಂತಿ, ಕೆ.ವಿ. ಅರುಣ್, ಎಂ.ಎಸ್. ನರೇಶ್ ಕುಮಾರ್ ಮತ್ತು ಎಂ.ಎಸ್. ಗಣೇಶ ಮತ್ತಿತರರು ಇದ್ದರು.