ಕಡಂಗ, ಅ. ೧೦: ಸ್ವಚ್ಛತೆ ಹಾಗೂ ನೈರ್ಮಲ್ಯದ ಪಾಠಗಳನ್ನು ಯಾರಿಂದಲೂ ಬೋಧಿಸಿ ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ ಸ್ವಚ್ಛತೆ ಎಂಬುದು ಪ್ರತಿಯೊಬ್ಬರಿಗೆ ಸ್ವ ಇಚ್ಛೆಯಿಂದ ಬಂದಾಗ ಸ್ವಚ್ಛ ಪರಿಸರ ನಿರ್ಮಿಸಲು ಸಾಧ್ಯ ಎಂದು ನರಿಯಂದಡ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಅಭಿಪ್ರಾಯಪಟ್ಟರು. ವೀರಾಜಪೇಟೆ ಕಾವೇರಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಕಡಂಗ ಅರಪಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನÀ ನಡೆದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮನುಷ್ಯನಿಗೆ ಆರೋಗ್ಯವೇ ದೊಡ್ಡ ಭಾಗ್ಯ. ಆರೋಗ್ಯ ಉತ್ತಮವಾಗಿರಲು ನೈರ್ಮಲ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು . ಮನೆಯಲ್ಲಿ ಹಸಿ ಕಸ ಒಣ ಕಸಗಳನ್ನು ಬೇರ್ಪಡಿಸಿ ಹಸಿ ಕಸವನ್ನು ಕಾಂಪೋಸ್ಟ್ ಗೊಬ್ಬರವಾಗಿ ಪರಿವರ್ತಿಸಿ ಗಿಡಗಳಿಗೆ ಬಳಸಿಕೊಳ್ಳಬೇಕು. ಒಣ ಕಸಗಳನ್ನು ಸ್ವಚ್ಛತಾಕರ್ಮಿಗಳಿಗೆ ನೀಡಿ ಪರಿಸರ ಮಾಲಿನ್ಯವಾಗದಂತೆ ಪ್ರತಿಯೊಬ್ಬರು ಗಮನ ಹರಿಸಿದರೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಸಾಧ್ಯ. ಇದನ್ನು ಹೊರತುಪಡಿಸಿ ಸ್ವಚ್ಛತೆಯ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಹಾಗೂ ಇತರ ಇಲಾಖೆಗಳ ಮೇಲೆ ಹೊರಿಸಿ ಬೇಜವಾಬ್ದಾರಿ ಮೆರೆಯುವುದರಿಂದ ಏನೂ ಪ್ರಯೋಜನವಾಗುವುದಿಲ್ಲ ಪ್ರತಿಯೊಬ್ಬರೂ ಕೈ ಜೋಡಿಸಿ ಸ್ವಚ್ಛತೆಗೆ ಆದ್ಯತೆ ನೀಡಿದಾಗ ಉತ್ತಮ ಪರಿಸರ ನಿರ್ಮಾಣ ಸಾಧ್ಯ ಎಂದರು. ವೇದಿಕೆಯ ಮೇಲೆ ನರಿಯಂದಡ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ರಾಣಿ ಗಣಪತಿ, ಎನ್‌ಎಸ್.ಎಸ್. ಯೋಜನಾಧಿಕಾರಿ ಸುನಿಲ್ ಕುಮಾರ್ ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ನರಿಯಂದಡ ಗ್ರಾಮ ಪಂಚಾಯಿತಿ ಮುಖ್ಯ ರಸ್ತೆಯಲ್ಲಿ ಎರಡು ಗಂಟೆಗಳ ಕಾಲ ಸ್ವಚ್ಛತಾ ಕಾರ್ಯ ನಿರ್ವಹಿಸಿ ೧೫ ಚೀಲದಷ್ಟು ವಿವಿಧ ಪ್ಲಾಸ್ಟಿಕ್, ನೀರಿನ ಬಾಟಲ್‌ಗಳು ಹಾಗೂ ಇನ್ನಿತರ ತ್ಯಾಜ್ಯಗಳನ್ನು ಸಂಗ್ರಹಿಸಿದರು.