ಕುಶಾಲನಗರ, ನ. ೧೫: ಶ್ರೀ ಗಣಪತಿ ದೇವಸ್ಥಾನ ರಥೋತ್ಸವ ಅಂಗವಾಗಿ ಬುಧವಾರ ರಾತ್ರಿ ಕಾವೇರಿ ನದಿಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಭಕ್ತಿ ಭಾವದಿಂದ ಜರುಗಿತು.

ದೇವಾಲಯದಿಂದ ವಿದ್ಯುತ್ ಅಲಂಕೃತ ಮಂಟಪದಲ್ಲಿ ರಥಬೀದಿ ಮೂಲಕ ಸಾಗಿ ಬಂದ ಗಣಪತಿ ಮೂರ್ತಿಗೆ ಕಾವೇರಿ ನದಿ ತಟದಲ್ಲಿ ಪೂಜೆ ಸಲ್ಲಿಸಿ ನಂತರ ನದಿಯಲ್ಲಿ ಮೂರು ಸುತ್ತು ಬಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು ಮತ್ತು ರಾಘವೇಂದ್ರ ಭಟ್ ನೇತೃತ್ವದಲ್ಲಿ ಅರ್ಚಕರ ತಂಡದಿAದ ಪೂಜಾ ಕಾರ್ಯಕ್ರಮ ಜರುಗಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಮಹಿಳೆಯರು ಈ ಸಂದರ್ಭ ನದಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು.

ದೇವಾಲಯ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಮುಖರು ಇದ್ದರು.