+

ಕುಶಾಲನಗರ, ಡಿ. ೬: ಪೂಜೆ ಪುನಸ್ಕಾರಗಳನ್ನು ಮಾಡುವ ಮೂಲಕ ದೈವಶಕ್ತಿ ಪಡೆಯಲು ಸಾಧ್ಯ ಎಂದು ತೊರೆನೂರು ವಿರಕ್ತ ಮಠಾಧೀಶರಾದ ಶ್ರೀ ಮಲ್ಲೇಶ ಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೂಡಿಗೆ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಹೆಬ್ಬಾಲೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವ್ಯವಸ್ಥಾಪನಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಶ್ರೀ ಬನಶಂಕರಿ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿ ಮಾತನಾಡಿದರು. ದೇವರು, ಪ್ರಕೃತಿ ಆರಾಧನೆ ಮೂಲಕ ಎಲ್ಲವೂ ಗಳಿಕೆ ಸಾಧ್ಯ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಮಾಜಕ್ಕೆ ಒಳಿತಾಗುವ ಕೆಲಸ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ವಿಷಯವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಸ್ಥಾಪಕ ಅಧ್ಯಕ್ಷರಾದ ಎಂ.ಬಿ. ಅಭಿಮನ್ಯು ಕುಮಾರ್, ಧರ್ಮಸ್ಥಳದ ಬಗ್ಗೆ ಅಪಚಾರ ಎಸಗಿರುವ ವ್ಯಕ್ತಿಗಳ ಮೇಲೆ ಸರಕಾರ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು.

ತಪ್ಪು ಸಂದೇಶ ನೀಡುವ ಮೂಲಕ ಅನವಶ್ಯಕವಾಗಿ ಭಕ್ತಾದಿಗಳ ನಡುವೆ ಗೊಂದಲ ಉಂಟು ಮಾಡಿರುವುದು ಸರಿಯಲ್ಲ ಎಂದ ಅವರು, ಕ್ಷೇತ್ರದ ಗ್ರಾಮ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾದ ಹೆಚ್.ಎಸ್. ರಘು ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇದಿಕೆಯಲ್ಲಿ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೋಭಾ ಪ್ರಕಾಶ್, ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಆರ್. ಲತಾ ಬಾಯಿ, ದೇವಾಲಯ ಸಮಿತಿ ಅಧ್ಯಕ್ಷರಾದ ಹೆಚ್.ಟಿ. ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಹೆಚ್.ಎಸ್. ಅಶೋಕ, ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ವಿ.ಡಿ. ಪಂಡರಿಕಾಕ್ಷ ಮಾತನಾಡಿದರು.

ಬೆಳಿಗ್ಗೆ ೮ ಗಂಟೆಯಿAದ ಸತ್ಯನಾರಾಯಣ ಪೂಜೆಯಲ್ಲಿ ಪಾಲ್ಗೊಂಡ ವ್ರತದಾರಿಗಳು ಸಂಕಲ್ಪ ಮಾಡಿ ನಂತರ ಮಹಾಪೂಜೆ, ಮಹಾಪ್ರಸಾದ ವಿನಿಯೋಗ ನಡೆಯಿತು.

ಈ ಸಂದರ್ಭ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಸದಸ್ಯರಾದ ಕೆ.ಎಸ್. ರಾಜಶೇಖರ್, ಎಂ.ಎನ್. ಚಂದ್ರಮೋಹನ್, ಸೋಮವಾರಪೇಟೆ ಕ್ಷೇತ್ರ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಕೂಡಿಗೆ ವಲಯ ಮೇಲ್ವಿಚಾರಕರಾದ ಅಚ್ಚುತ, ಕುಶಾಲನಗರ ವಲಯ ಮೇಲ್ವಿಚಾರಕರಾದ ನಾಗರಾಜ್, ಸೇವಾ ಪ್ರತಿನಿಧಿಗಳು, ಸತ್ಯನಾರಾಯಣ ಪೂಜಾ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಮತ್ತು ಕೂಡಿಗೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಚಿಕ್ಕ ಅಳುವಾರದಮ್ಮ ನವಜೀವನ ಸಮಿತಿ ಸದಸ್ಯರುಗಳು ಇದ್ದರು.