ಕುಶಾಲನಗರ, ಡಿ. ೨೦: ಕುಶಾಲನಗರ ತಾಲೂಕು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆ, ಅರಣ್ಯ ಇಲಾಖೆ ಒಳಪಟ್ಟ ಜಾಗಗಳು ಮತ್ತು ಸಾರ್ವಜನಿಕ ರಸ್ತೆಗಳನ್ನು ಒತ್ತುವರಿ ಮಾಡುವ ಮೂಲಕ ಲಕ್ಷಾಂತರ ರೂಪಾಯಿಗಳಿಗೆ ಮಾರಾಟ ಮಾಡಿರುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ಗೋವಿಂದ ರಾಜ್ ದಾಸ್ ಆರೋಪಿಸಿದ್ದಾರೆ.
ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸಂಬAಧಿಸಿದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಕೂಡಲೇ ಸೂಕ್ತ ಕ್ರಮ ಜರುಗಿಸಿ ಸಾರ್ವಜನಿಕ ದಾರಿ ತೆರವುಗೊಳಿಸುವುದು ಮತ್ತು ಸರಕಾರಿ ಜಾಗವನ್ನು ಸಂರಕ್ಷಣೆ ಮಾಡುವಂತೆ ಒತ್ತಾಯಿಸಿದ್ದಾರೆ.
ಈ ಸಂಬAಧ ಈಗಾಗಲೇ ಗ್ರಾಮ ಸಭೆಯಲ್ಲಿ ತಾನು ಅರೆಬೆತ್ತಲೆ ಪ್ರತಿಭಟನೆಗೆ ಮುಂದಾಗಿದ್ದು ಕ್ರಮ ಕೈಗೊಳ್ಳಲು ಒತ್ತಾಯಿಸಿರುವುದಾಗಿ ತಿಳಿಸಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಕೂಡುಮಂಗಳೂರು ಗ್ರಾಮದ ಸರ್ವೆ ನಂಬರ್ ೧೪/೭ ೧೮/೧, ಹಾಗೂ ೧೭/೧ ರಲ್ಲಿ ಜಮೀನಿಗೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ದಾರಿ ತಲೆಮಾರುಗಳಿಂದ ಬಳಕೆಯಾಗಿತ್ತು. ಇದೀಗ ಅನಧಿಕೃತವಾಗಿ ಅತಿಕ್ರಮಣ ಮಾಡಿ ಕೆಲವು ವ್ಯಕ್ತಿಗಳು ಬೇಲಿ ಹಾಕಿದ್ದಾರೆ ಎಂದು ಅವರು ಆರೋಪಿಸಿದರು.
ಸಾರ್ವಜನಿಕ ರೈತರ ಜಮೀನಿಗೆ ತೆರಳುವ ಸಂಪರ್ಕ ಕಲ್ಪಿಸುವ ರಸ್ತೆ ಮಾರಾಟ ಮಾಡಿರುವುದು ಅಪರಾಧ ಎಂದು ತಿಳಿಸಿದ ಅವರು ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು.
ಹಲವು ಬಾರಿ ಮನವಿ ಸಲ್ಲಿಸಿದರೂ ಕಂದಾಯ ಅಧಿಕಾರಿಗಳು ಮತ್ತು ಭೂವಿಜ್ಞಾನ ಇಲಾಖೆ ಕ್ರಮ ಜರುಗಿಸಿಲ್ಲ ಎಂದು ಅವರು ಆರೋಪಿಸಿದರು. ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಕಾನೂನು ಉಲ್ಲಂಘಿಸಿ ದಾಖಲಾತಿ ತಿರುಚಿ ಅವ್ಯವಹಾರಕ್ಕೆ ಕೈಜೋಡಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.
ಈಗಾಗಲೇ ಅಧಿಕಾರಿಗಳಿಗೆ ಎಲ್ಲ ಮಾಹಿತಿಗಳನ್ನು ಒದಗಿಸಲಾಗಿದ್ದು ತಕ್ಷಣ ಸರಕಾರಿ ಜಾಗ ತೆರವುಗೊಳಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಬAಧಿಸಿದ ಇಲಾಖೆ ಕಚೇರಿಗಳ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷೆ ಜಯಶ್ರೀ ಮುರುಗೇಶ್ ಉಪಾಧ್ಯಕ್ಷೆ ಸರಳ ರಾಮಣ್ಣ, ಕಾರ್ಯದರ್ಶಿ ನಿರ್ಮಲ ಸುರೇಶ್ ಮತ್ತು ಸ್ಥಳೀಯರಾದ ಮೀನಾಕ್ಷಿ ಅವರುಗಳು ಇದ್ದರು.