ಕುಶಾಲನಗರ, ಜ. ೧: ಕಾವೇರಿ ನದಿಯ ಸಂರಕ್ಷಣೆ ಮತ್ತು ನದಿ ತಟಗಳ ಅಭಿವೃದ್ಧಿ ಬಗ್ಗೆ ಹಾಗೂ ನದಿ ತಟದ ಒತ್ತುವರಿ ತೆರವು ಮತ್ತು ಜನರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೂಲಕ ಮುಂದಿನ ಬಜೆಟ್ ಅಧಿವೇಶನದಲ್ಲಿ ಯೋಜನೆ ರೂಪಿಸಲು ಕೋರಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಮೈಸೂರಿನಲ್ಲಿ ಸಂಸದರ ಕಚೇರಿಗೆ ತೆರಳಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ನೇತೃತ್ವದಲ್ಲಿ ಮನವಿ ಸಲ್ಲಿಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಲಾಯಿತು. ಕಾವೇರಿ ಕೊಡಗು ಜಿಲ್ಲೆಯ ತಲಕಾವೇರಿಯ ಮೂಲದಿಂದ ಹರಿಯುವ ಪ್ರದೇಶಗಳಲ್ಲಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಸಮಗ್ರ ಮಾಹಿತಿ ಒದಗಿಸಲಾಗಿದ್ದು, ಮಡಿಕೇರಿ, ವೀರಾಜಪೇಟೆ ಮತ್ತು ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ನದಿ ಕಲುಷಿತಗೊಳ್ಳಲು ಕಾರಣಗಳು ಸೇರಿದಂತೆ ಅಗತ್ಯ ಯೋಜನೆಗಳ ಮಾಹಿತಿಯನ್ನು ನೀಡಲಾಗಿದೆ. ಕಾವೇರಿ ನದಿ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರದ ಮೂಲಕ ಮುಂದಿನ ವರ್ಷದ ಬಜೆಟ್‌ನಲ್ಲಿ ಅಗತ್ಯ ಅನುದಾನ ಮೂಲಕ ಯೋಜನೆಗಳನ್ನು ರೂಪಿಸಿ ಹಂತಹAತವಾಗಿ ಅನುಷ್ಠಾನಗೊಳಿಸುವಂತೆ ಮನವಿ ಪತ್ರದಲ್ಲಿ ಕೋರಲಾಗಿದೆ. ಉತ್ತರದಲ್ಲಿ ನಮಾಮಿ ಗಂಗೆ ಯೋಜನೆಯಂತೆ ಕಾವೇರಿಗೆ ನಮಾಮಿ ಕಾವೇರಿ ಯೋಜನೆ ರೂಪಿಸಿ ಸ್ವಚ್ಛ ಕಾವೇರಿ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಲಾಗಿದೆ.