ನಾಪೋಕ್ಲು, ಜ. ೧೧: ಇಲ್ಲಿಗೆ ಸಮೀಪದ ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅನೀಮಿಯ ಕಾರ್ಯಾಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾದ ಶಿಬಿರದಲ್ಲಿ ಮಕ್ಕಳ ರಕ್ತ ಹೀನತೆ, ಅಪೌಷ್ಟಿಕತೆಯ ತಪಾಸಣೆ ನಡೆಸಲಾಯಿತು. ಶಿಬಿರದಲ್ಲಿ ಹಿಮೋಗ್ಲೋಬಿನ್ ಕಡಿಮೆ ಇರುವ ಮಕ್ಕಳಿಗೆ ಔಷಧಿಗಳನ್ನು ವಿತರಿಸಲಾಯಿತು.

ಐದು ವರ್ಷದೊಳಗಿನ ಮಕ್ಕಳಿಗೆ ನೀಡಬೇಕಾದ ಆಹಾರ ಪದ್ಧತಿ, ಸರಿಯಾದ ಸಮಯಕ್ಕೆ ಅನೀಮಿಯ ಆರೋಗ್ಯ ತಪಾಸಣೆ ನಡೆಸುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಪೋಷಕರಿಗೆ ತಿಳಿಸಿದರು.

ಅಂಗನವಾಡಿ ಕೇಂದ್ರಕ್ಕೆ ಒಳಪಡುವ ಐದು ವರ್ಷದೊಳಗಿನ ಮಕ್ಕಳನ್ನು ಪೋಷಕರು ಕರೆತಂದು ಆರೋಗ್ಯ ತಪಾಸಣೆ ನಡೆಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಆರ್‌ಬಿಎಸ್‌ಕೆ ತಂಡದ ವೈದ್ಯಾಧಿಕಾರಿ ಶೈಮಾ, ಶುಶ್ರೂಷಕಿ ಮಮತಾ, ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು.

ಈ ಸಂದರ್ಭ ಬೇತು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಆಶಾ ಅಪ್ಪಣ್ಣ, ಸಹಾಯಕ ಲೀಲಾವತಿ, ಆಶಾ ಕಾರ್ಯಕರ್ತೆಯರಾದ ಗಾಯತ್ರಿ, ಬಿನಿಷ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಪೋಷಕರು ಹಾಗೂ ಮಕ್ಕಳು ಹಾಜರಿದ್ದರು.