ಸೋಮವಾರಪೇಟೆ, ಜ. ೧೭: ತಾಲೂಕಿನ ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದ ಉದ್ಘಾಟನೆಗೆ ಆಗಮಿಸುವಂತೆ ಶಾಸಕ ಡಾ. ಮಂತರ್ ಗೌಡ ಅವರನ್ನು ಒಳಗೊಂಡ ಪ್ರಮುಖರ ನಿಯೋಗ ರಾಜ್ಯ ರಸ್ತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿತು.
ಶನಿವಾರಸಂತೆ ಭಾಗದ ಜನರ ಬಹುದಶಕಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಇಲಾಖೆಯಿಂದ ಅನುದಾನ ಒದಗಿಸಿದ ಸಚಿವರಿಗೆ ಧನ್ಯವಾದ ಸಲ್ಲಿಸಿದ ನಿಯೋಗ, ಫೆ. ೭ ರಂದು ನಿಲ್ದಾಣದ ಉದ್ಘಾಟನೆಗೆ ಆಗಮಿಸುವಂತೆ ಮನವಿ ಮಾಡಿತು. ನಿಯೋಗದ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಇದರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನೂ ಭೇಟಿ ಮಾಡಿ ಆಹ್ವಾನ ನೀಡಲಾಯಿತು. ಪ್ರಮುಖರಾದ ಹೆಚ್.ಎಸ್. ಚಂದ್ರಮೌಳಿ, ಬಿ.ಬಿ. ಸತೀಶ್, ಕಿರಣ್ ಉದಯಶಂಕರ್ ಸೇರಿದಂತೆ ಇತರರು ಇದ್ದರು.