ಸೋಮವಾರಪೇಟೆ, ಮೇ ೨೪: ಇಂದಿನ ಯುವಜನಾಂಗ ಕನ್ನಡದ ಓದು, ಬರಹ ಮತ್ತು ಸಾಹಿತ್ಯ ಚಟುವಟಿಕೆಗಳತ್ತ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು. ಕನ್ನಡ ಸಾಹಿತ್ಯದ ಶ್ರೀಮಂತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ೯ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಜಲಜಾ ಶೇಖರ್ ಕಿವಿಮಾತು ಹೇಳಿದರು.
ಜಿಲ್ಲಾ, ತಾಲೂಕು ಹಾಗೂ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಸಾಹಿತ್ಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯವು ಸಮಾಜದ ಮೌಲ್ಯಗಳು, ಬದುಕಿನ ಅನುಭವಗಳು ಮತ್ತು ಸಂಸ್ಕೃತಿಯ ಪ್ರತಿಬಿಂಬವಾಗಿದ್ದು, ಓದುಗರಲ್ಲಿ ಚಿಂತನಾ ಶಕ್ತಿ ಬೆಳೆಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದರು. ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಮೂಲಕ ಕನ್ನಡ ಭಾಷೆಯ ಮೇಲಿನ ಪ್ರೀತಿ ಹೆಚ್ಚಿಸಬೇಕು ಎಂದು ಕರೆ ನೀಡಿದರು
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಉದ್ಘಾಟಿಸಿ ಮಾತನಾಡಿ, ಕನ್ನಡಿಗರ ತವರು ಮನೆ ಕನ್ನಡ ಸಾಹಿತ್ಯ ಪರಿಷತ್. ೧೧೨ ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ ಕನ್ನಡ ನಾಡು, ನುಡಿಗೆ ರಾಜಕೀಯ ರಹಿತವಾಗಿ ತಮ್ಮ ಸೇವೆ ಸಲ್ಲಿಸುತ್ತಾ ಬರುತ್ತಿದೆ. ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಅಸ್ತಿತ್ವದ ಸಂಕೇತವಾಗಿದೆ. ಕನ್ನಡ ಸಾಹಿತ್ಯ ಪರಿಷತ್ ರಾಜ್ಯದಾದ್ಯಂತ ಸಾಹಿತ್ಯ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಭಾಷಾಭಿಮಾನ ಬೆಳೆಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ನ ಇತಿಹಾಸ ಮತ್ತು ಅದರ ಸಾಧನೆಗಳನ್ನು ವಿವರಿಸಿದರು. ಕನ್ನಡದ ಅಸ್ಮಿತೆಯನ್ನು ಉಳಿಸುವ ನಿಟ್ಟಿನಲ್ಲಿ ಪರಿಷತ್ ನಿರಂತರವಾಗಿ ಸಾಹಿತ್ಯ ಸಮ್ಮೇಳನ, ಕವಿಗೋಷ್ಠಿ, ದತ್ತಿ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು. ಗ್ರಾಮೀಣ ಭಾಗಗಳಲ್ಲಿಯೂ ಕನ್ನಡ ಸಾಹಿತ್ಯ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ಹೋಬಳಿಮಟ್ಟದಲ್ಲಿಯೂ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಹಿತಿ ಲಾವಣ್ಯ ಮೋಹನ್, ಕ.ಸಾ.ಪ. ತಾಲೂಕು ಗೌರವ ಕಾರ್ಯದರ್ಶಿ ಎ.ಪಿ. ವೀರರಾಜು, ಶಾಂತಳ್ಳಿ ಪ್ಯಾಕ್ಸ್ ಸಿಇಒ ಡಿ.ಪಿ. ಜೋಯಪ್ಪ, ಕ.ಸಾ.ಪ. ಹಿರಿಯ ಸದಸ್ಯ ಎಸ್.ಆರ್. ಶಿವಪ್ಪ, ಕೃಷಿ ವಿಜ್ಞಾನಿ ಎ.ಡಿ. ಮೋಹನ್ ಕುಮಾರ್, ಸಾಹಿತಿ ಜಾನ್ ಪೌಲ್ ಡಿಸೋಜ ಅವರುಗಳನ್ನು ಸನ್ಮಾನಿಸಲಾಯಿತು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಜೆ.ಸಿ. ಶೇಖರ್(ಪ್ರಥಮ), ಶ.ಗ. ನಯನತಾರಾ (ದ್ವೀತಿಯ) ಶುಭ ತೃತೀಯ ಸ್ಥಾನ ಪಡೆದರು. ವೇದಿಕೆಯಲ್ಲಿ ತಾಲೂಕು ಅಧ್ಯಕ್ಷ ಎಸ್. ವಿಜೇತ್, ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಇದ್ದರು.