ಕುಶಾಲನಗರ, ಮೇ ೨೪: ಬಕ್ರೀದ್ ಹಬ್ಬದ ಪ್ರಯುಕ್ತ ನಡೆಯುವ ಕಾರ್ಯಕ್ರಮಗಳ ಅಂಗವಾಗಿ ಕುಶಾಲನಗರ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ನಡೆಯಿತು.
ಸೋಮವಾರಪೇಟೆ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಶಾಲನಗರದ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯ ಮಸೀದಿಗಳ ಆಡಳಿತ ಮಂಡಳಿ ಪ್ರಮುಖರು ಮತ್ತು ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡು ಚರ್ಚೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಡಿ.ವೈ.ಎಸ್.ಪಿ ಚಂದ್ರಶೇಖರ್, ಶಾಂತಿಯುತವಾಗಿ ಬಕ್ರೀದ್ ಕಾರ್ಯಕ್ರಮ ನಡೆಸುವಂತೆ ಸೂಚನೆ ನೀಡಿದರು. ಮೆರವಣಿಗೆ ಮತ್ತಿತರ ಯಾವುದೇ ರೀತಿಯ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಹೊಂದಿರಬೇಕು ಎಂದು ಸಲಹೆ ನೀಡಿದರು. ಕುಶಾಲನಗರ ಆದಿ ಶಂಕರಾ ಚಾರ್ಯ ಬಡಾವಣೆಯ ವ್ಯಾಪ್ತಿಯಲ್ಲಿ ಇರುವ ಮಸೀದಿಗೆ ಸೇರಿದ ಜಾಗದಲ್ಲಿ ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ಪ್ರಸಕ್ತ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಮಸೀದಿಯ ಪ್ರಮುಖರಿಗೆ ತಿಳಿಸಿದರು.
ಕುಶಾಲನಗರ ನಗರ ಠಾಣೆ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ದಿನೇಶ್ ಕುಮಾರ್, ಠಾಣಾಧಿಕಾರಿಗಳಾದ ಶಿವಣ್ಣ, ಸ್ವಾಮಿ, ರಾಮಚಂದ್ರ ಮತ್ತು ಪ್ರೋಬೇಷನರಿ ಸಬ್ ಇನ್ಸ್ಪೆಕ್ಟರ್ಗಳು ಇದ್ದರು.
ಸ್ಥಳೀಯ ಮಸೀದಿಗಳ ಆಡಳಿತ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಹಿಂದೂಪರ ಸಂಘಟನೆಗಳ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.