ಗೋಣಿಕೊಪ್ಪ ವರದಿ, ಮೇ ೩೧: ಮಾಧ್ಯಮ ಸ್ಪಂದನ ಸಂಸ್ಥಾಪಕ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಆರ್ಟ್ ಆಫ್ ಲಿವಿಂಗ್ ಪ್ರಶಸ್ತಿ ಲಭಿಸಿದೆ.
ಮಾಧ್ಯಮ ಸ್ಪಂದನದ ಮೂಲಕ ಸಲ್ಲಿಸಿರುವ ಜನಸೇವೆಯನ್ನು ಗುರುತಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಅನುದಿನದ ತೆರೆಮರೆಯ ಸಾಧಕ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ಪರಮ ಪೂಜ್ಯ ಶ್ರೀ ರವಿಶಂಕರ್ ಗುರೂಜೀ ಅವರ ೭೫ನೇ ಜನ್ಮ ದಿನಾಚರಣೆಯ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ೨೫ ಸಾಧಕರನ್ನು ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸಾರ್ವಜನಿಕ ಸೇವೆಯ ಉದ್ದೇಶದಿಂದ ಕೊಡಗಿನ ಪತ್ರಕರ್ತರನ್ನು ಒಗ್ಗೂಡಿಸಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಮಾಧ್ಯಮ ಸ್ಪಂದನ ಸಂಸ್ಥೆಯನ್ನು ಸ್ಥಾಪಿಸಿ, ಕೋವಿಡ್ ಅವಧಿಯಲ್ಲಿ ಅಗತ್ಯವಿರುವವರಿಗೆ ಆಹಾರ ಕಿಟ್ಗಳು ಮತ್ತು ಔಷಧಿಗಳನ್ನು ವಿತರಿಸುವುದು, ಹೊರ ಜಿಲ್ಲೆಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವುದು ಸೇರಿದಂತೆ ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳಲಾಯಿತು. ಕೋವಿಡ್ಗೆ ಬಲಿಯಾದ ಇಬ್ಬರ ಅಂತ್ಯಕ್ರಿಯೆಯನ್ನು ಸಹ ಮಾಧ್ಯಮ ಸ್ಪಂದನದ ಮೂಲಕ ನೆರವೇರಿಸಿ ಮಾದರಿಯಾಗಿದ್ದರು.
ಕೋವಿಡ್ ನಂತರವೂ ಮಾಧ್ಯಮ ಸ್ಪಂದನ ತನ್ನ ಜನಸೇವೆಯನ್ನು ಮುಂದುವರಿಸಿದ್ದು, ದಾನಿಗಳ ನೆರವಿನಿಂದ ಆರ್ಥಿಕವಾಗಿ ದುರ್ಬಲ ಕುಟುಂಬಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಅಸಹಾಯಕರ ವೈದ್ಯಕೀಯ ಚಿಕಿತ್ಸೆಗೆ ನೆರವು ಒದಗಿಸಿದೆ. ಅಲ್ಲದೆ “ಡ್ರಗ್ಸ್ ಮುಕ್ತ ಕೊಡಗು” ಜಾಗೃತಿ ಅಭಿಯಾನವನ್ನು ನಡೆಸಿ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಿದೆ.